ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್‌ – ಆರೋಪಿ ಬಂಧನಕ್ಕೆ ಆಗ್ರಹ

ಮಂಗಳೂರು (ತೀರ್ಥಹಳ್ಳಿ): ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದೆ. “ಎಬಿವಿಪಿ ತಾಲೂಕು ಅಧ್ಯಕ್ಷ ಎಸಗಿರುವ ಕೃತ್ಯವು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು. ಪ್ರಭಾವಿಗಳ ಒತ್ತಡಕ್ಕೆ ಪೊಲೀಸರು ಮಣಿಯಬಾರದು” ಎಂದು ಎನ್‌ಎಸ್‌ಯುಐ ಮನವಿ ಮಾಡಿದೆ.

Update
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here