ಬಿಜೆಪಿ ಅವಧಿಯಲ್ಲಿ 2.26ಕೋಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಂಚನೆ – ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ ಆರೋಪ

ಮಂಗಳೂರು(ಬೆಂಗಳೂರು): ಬಿಜೆಪಿ ಸರಕಾರದ ಅವಧಿಯಲ್ಲಿ ಎಸ್‌ಸಿ-ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಸುಮಾರು 2.26 ಕೋಟಿ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡದೆ ವಂಚನೆ ಮಾಡಲಾಗಿದೆ. ಈ ಅವ್ಯವಸ್ಥೆಗೆ ಕಾರಣರಾದ ಎಲ್ಲ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ತನಿಖೆ ನಡೆಸಬೇಕೆಂದು ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ.

ಎಸ್‌ಸಿ-ಎಸ್‌ಟಿ, ಹಿಂ.ವರ್ಗಗಳ ವಿದ್ಯಾರ್ಥಿಗಳಿಗೆ ಸಿಗುತ್ತಿದ್ದ ವಿದ್ಯಾರ್ಥಿ ವೇತನ ನೂತನ ಎಸ್‌ಎಸ್‌ಪಿ ತಂತ್ರಾಂಶದ ನೆಪ ಹೇಳಿಕೊಂಡು ಉದ್ದೇಶಪೂರಕವಾಗಿ ವಿದ್ಯಾರ್ಥಿ ವೇತನದಿಂದ ಅರ್ಹರನ್ನು ವಂಚಿತರನ್ನಾಗಿ ಮಾಡಲಾಗಿದೆ. ಇದಕ್ಕೆ ಕಾರಣವಾದ ಸಮಾಜ ಕಲ್ಯಾಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮೌರ್ಯ, ಒತ್ತಾಯಿಸಿದ್ದಾರೆ.

ಬಿಜೆಪಿ ಸರಕಾರದ ಅವಧಿಯ 2020-21ನೇ ಸಾಲಿನಿಂದಲೇ ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ಸಿಗುತ್ತಿಲ್ಲ. ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್‌ಗಳನ್ನು ತಡೆಯಲಾಗಿದೆ ಹಾಗೂ ವಿವಿಗಳಲ್ಲಿಯೂ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿಲ್ಲ. ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನದಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ. ಈಗಿರುವ ಕಾಂಗ್ರೆಸ್ ಸರಕಾರ ಇದೆಲ್ಲವನ್ನೂ ಪರಿಗಣಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ಮನವಿ ಮಾಡಿದರು.

ಸರಕಾರವು ವಿದ್ಯಾರ್ಥಿವೇತನ ನೀಡುವ ಜವಾಬ್ದಾರಿಯನ್ನು ಆಯಾ ಇಲಾಖೆಗೆ ನೀಡಬೇಕು. ಜತೆಗೆ ಉನ್ನತ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ವಿವಿಗಳಲ್ಲಿನ ವಿದ್ಯಾರ್ಥಿವೇತನ ಪರಿಶೀಲಿಸಬೇಕು ಎಂದು ವೇಣುಗೋಪಾಲ್ ಮೌರ್ಯ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here