ಮಂಗಳೂರು/ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಕುರಿತು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.ಈ ಘಟನೆಯಿಂದ ತೀವ್ರ ವಿಚಲಿತಗೊಂಡಿದ್ದೇವೆ. ಯಾವುದೇ ಕಾರಣಕ್ಕೂ ಕೃತ್ಯ ಸ್ವೀಕಾರಾರ್ಹವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಹೇಳಿದೆ.
ಅಲ್ಲದೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.ನಾವು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ ನಾವು ಮಧ್ಯಪ್ರವೇಶ ಮಾಡಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ಪೀಠವು ಹೇಳಿದೆ.
ಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಹೀಗಾಗಿ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದೆ. ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.