ಯುಪಿ ಯಿಂದ ವಿಮಾನದಲ್ಲಿ ಆಗಮನ-ಪ್ರಯಾಣಿಕರ ಸೋಗಿನಲ್ಲಿ ರೈಲಿನಲ್ಲಿ ಪ್ರಯಾಣ-ಟಾರ್ಗೆಟ್ ಚಿನ್ನಾಭರಣ-ಖತರ್ನಾಕ್‌ ಕಳ್ಳರ ಬಂಧನ

ಮಂಗಳೂರು: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಉತ್ತರ ಪ್ರದೇಶದ ಮಿರ್ಜಾಪುರದ ಧೋರುಪುರದ ಅಭಯ್ ರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಎಂಬವರನ್ನು ಮಂಗಳೂರಿನ ಆರ್.ಪಿ.ಎಫ್. ತಂಡ ಬಂಧಿಸಿದೆ.

ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚಾರ ಮಾಡುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂದರ್ಭ ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದ ಈ ಇಬ್ಬರು ಯುವಕರನ್ನು ವಶಕ್ಕೆ ಪಡೆದ ಆರ್ ಪಿಎಫ್ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಇಬ್ಬರೂ ರೈಲಿನಲ್ಲಿ ಕಳ್ಳತನ ಎಸಗಿರುವುದಾಗಿ ಒಪ್ಪಿಕೊಂಡಿದ್ದರು. ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದು, ಈ ವೇಳೆ ಮಲಗಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚುತ್ತಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು. ಈ ಕೃತ್ಯ ಎಸಗಲು ಅವರು ವಾರಾಂತ್ಯದ ರೈಲನ್ನೇ ಆಯ್ಕೆ ಮಾಡುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

 

LEAVE A REPLY

Please enter your comment!
Please enter your name here