ನ.7ಕ್ಕೆ ರಾಜ್ಯಾದ್ಯಂತ ನ್ಯಾಯ ಬೆಲೆ ಅಂಗಡಿ ಬಂದ್-ಕರೆ ನೀಡಿದ ರಾಜ್ಯ ಸರಕಾರಿ ಪಡಿತರ ವಿತರಕ ಸಂಘ

ಮಂಗಳೂರು(ಬೆಂಗಳೂರು): ಅನ್ನಭಾಗ್ಯ ಯೋಜನೆಯಡಿ ಕಾರ್ಡ್‍ದಾರರಿಗೆ ಹಣ ಬದಲು ಅಕ್ಕಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ಸರಕಾರಿ ಪಡಿತರ ವಿತರಕ ಸಂಘ ನ.7ಕ್ಕೆ ರಾಜ್ಯದಾದ್ಯಂತ ನ್ಯಾಯಬೆಲೆ ಅಂಗಡಿ ಬಂದ್ ಮಾಡಿ ಧರಣಿ ನಡೆಸಲು ತೀರ್ಮಾನಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ.7ರಂದು ಬೃಹತ್ ಧರಣಿ ನಡೆಸಲಾಗುತ್ತಿದ್ದು, ರಾಜ್ಯದ ಎಲ್ಲಾ ಭಾಗಗಳಿಂದ ಪಡಿತರ ವಿತರಕರು ಪಾಲ್ಗೊಳ್ಳಲಿದ್ದು, ಅಂದು ಯಾವುದೇ ಚಟುವಟಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ಸಮಸ್ಯೆಗಳ ಬಗೆಹರಿಸಲು ಹಲವು ಬಾರಿ ಆಹಾರ ಇಲಾಖೆ ಸಚಿವರ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ ಜ್ವಲಂತವಾಗಿ ಕಾಡುತ್ತಿರುವ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ವಿಧಾನಸಭೆ ಚುನಾವಣೆ ಮುನ್ನ ಕಾಂಗ್ರೆಸ್ ಉಚಿತವಾಗಿ 10 ಕೆಜಿ ಅಕ್ಕಿ ವಿತರಿಸುವುದಾಗಿ ಗ್ಯಾರಂಟಿ ಯೋಜನೆ ಘೋಷಿಸಿತ್ತು. ಅದರಂತೆ, ರಾಜ್ಯದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರಕಾರ, ಅಕ್ಕಿ ಸಿಗುತ್ತಿಲ್ಲ ಎಂಬ ಕಾರಣವೊಡ್ಡಿ ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಯನ್ನು ಜುಲೈಯಿಂದ ಜಾರಿಗೆ ತಂದಿದೆ. ಇದರಿಂದಾಗಿ ನಮಗೆ ಕಮಿಷನ್ ಹಣ ಖೋತಾವಾಗಿದೆ. ಹೀಗಾಗಿ, ಕಾರ್ಡ್‍ದಾರರಿಗೆ ಕಡ್ಡಾಯವಾಗಿ ಅಕ್ಕಿ ವಿತರಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅದೇ ರೀತಿ, ಆಹಾರಧಾನ್ಯ ವಿತರಣೆ ವೇಳೆ ಕಾರ್ಡ್‍ದಾರರಿಗೆ ಮುದ್ರಿತ ರಸೀದಿ ನೀಡುವಂತೆ ಹೊರಡಿಸಿರುವ ಆದೇಶವನ್ನು ತಕ್ಷಣ ಸರಕಾರ ವಾಪಸ್ ಪಡೆಯಬೇಕು. ಪಡಿತರ ವಿತರಣೆಗಾರರ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಪಡಿತರ ವಿತರಣೆಗೆ ನೀಡಲಾಗುವ ಕಮಿಷನ್ ಹಣವೂ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು, ಕೂಡಲೇ ಇದನ್ನು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

LEAVE A REPLY

Please enter your comment!
Please enter your name here