ಜನವರಿ ಅಂತ್ಯಕ್ಕೆ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆ-ವಿಧಾನಸಭಾ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ

ಮಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಗ್ಡೆ, ಇದನ್ನು ಜಾತಿ ಜನಗಣತಿ, ಕಾಂತರಾಜು ಅಥವಾ ಜಯಪ್ರಕಾಶ್ ಹೆಗ್ಡೆ ವರದಿ ಎಂದು ಭಾವಿಸಬೇಕಿಲ್ಲ. ಇದು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಎಂದು ಸ್ಪಷ್ಟಪಡಿಸಿದ್ದಾರೆ.ಇಲ್ಲಿ ಮಧ್ಯಂತರ ವರದಿ ಎಂಬ ಗೊಂದಲಗಳು ಬೇಕಿಲ್ಲ. ಏಕಕಾಲಕ್ಕೆ ಪೂರ್ಣ ಪ್ರಮಾಣದ ವರದಿಯನ್ನು ಸಲ್ಲಿಸಲಾಗುತ್ತದೆ. ಜನವರಿ 31ಕ್ಕೆ ತಮ್ಮ ಅಧ್ಯಕ್ಷೀಯ ಅವಧಿ ಮುಗಿಯಲಿದೆ. ಅದರೊಳಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಯಾವುದೇ ಡೇಟಾ ಮಿಸ್ ಆಗಿಲ್ಲ, ಮೂಲ ಪ್ರತಿ ಅಷ್ಟೇ ಮಿಸ್ ಆಗಿತ್ತು. ಡೇಟಾ ಬೇಸ್ ಮೇಲೆ ವರದಿ ಸಿದ್ದವಾಗಿದೆ. ವರದಿ ಪುಸ್ತಕ ಪ್ರಿಂಟ್ ಹಂತದಲ್ಲಿದೆ. ಸಿದ್ಧವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯ ಕೇಳಲಾಗುವುದು. ಸಮಯ ಸಿಕ್ಕರೆ ಬಹುತೇಕ ಜನವರಿ 30ರ ಒಳಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಸುಮಾರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಸಮೀಕ್ಷಾ ವರದಿ ಸರ್ಕಾರದ ಕೈ ಸೇರಲಿದ್ದು, ಫೆಬ್ರವರಿ 12ರಿಂದ ಆರಂಭವಾಗುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ವರದಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here