ಹೊಸದಿಲ್ಲಿ: ಕರ್ನಾಟಕದಲ್ಲಿ ಪರೀಕ್ಷೆಗೆ ಹಾಜರಾಗಲು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಅನುಮತಿ ಕೋರಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಶರೀಯತ್ ಸಮಿತಿ ಅರ್ಜಿ ಸಲ್ಲಿಸಿದೆ. ಹೋಳಿ ಹಬ್ಬದ ನಂತರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸಿಜೆಐ ಡಿ ವೈ ಚಂದ್ರಚೂಡ್ ಹೇಳಿದ್ದಾರೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.
ಈ ನಡುವೆ ವಿದ್ಯಾರ್ಥಿಗಳ ಜೀವನದ ಮಹತ್ತರ ಘಟ್ಟವಾಗಿರುವ ದ್ವಿತೀಯ ಪಿಯು ಪರೀಕ್ಷೆ ಮಾ.9ರಂದು ಆರಂಭವಾಗಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ. ಮತ್ತು ಈ ಸಂಬಂಧ ಬರುವ ಯಾವುದೇ ಮನವಿಯನ್ನು ಪುರಸ್ಕರಿಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಹಿಜಾಬ್ ನಿಷೇಧ ಮಾಡಿರುವುದನ್ನು ಪ್ರಶ್ನಿಸಿ ಈ ಹಿಂದೆ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಸರಕಾರದ ತೀರ್ಮಾನವನ್ನು ಎತ್ತಿ ಹಿಡಿದಿತ್ತು. ಇದೀಗ ಮತ್ತೆ ಈ ಸಂಬಂಧ ಸುಪ್ರೀಂ ಕೋರ್ಟ್ ನ ಕದ ತಟ್ಟಲಾಗಿದೆ.