ಮಂಗಳೂರು: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತ್ ಮತ್ತು ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಸದ್ದಿಲ್ಲದೇ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಹೋಗಲಿದೆಯೇ ಅಥವಾ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ನಿರ್ಣಯಿಸಲು ಈಗಲೇ ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದರು. ಆದರೆ ಜೆಡಿಎಸ್ನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ಬಿಜೆಪಿಯ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿರುವ ಸಾಧ್ಯತೆಯಿದೆ ಎಂದು ಅವರದೇ ಪಕ್ಷದ ಮೂಲಗಳು ಹೇಳುತ್ತಿವೆ.
ಒಂದು ವೇಳೆ ಮೈತ್ರಿ ರಚನೆಯಾದ್ರೆ ಜೆಡಿಎಸ್ ಗೆಲ್ಲುತ್ತೆ ಅಂತ ಹೇಳುವ ಸುಮಾರು 5 ರಿಂದ 6 ಕ್ಷೇತ್ರಗಳನ್ನು ಬಿಟ್ಟುಕೊಡುವುದು. ಇನ್ನುಳಿದ ಕ್ಷೇತ್ರದಲ್ಲಿ ಸಂಪೂರ್ಣ ಬೆಂಬಲವನ್ನು ಬಿಜೆಪಿ ಕೇಳಬಹುದು, ಪ್ರತ್ಯಕ್ಷ ಹಾಗೂ ಪರೋಕ್ಷ ಮೈತ್ರಿ ಮಾಡಿಕೊಂಡರೆ ಎರಡೂ ಪಕ್ಷಗಳಿಗೆ ಸ್ವಲ್ಪ ಮಟ್ಟಿಗೆ ಲಾಭವಾಗಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.