ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ – ಸುದ್ದಿಗೆ ಸ್ಪಷ್ಟನೆ‌ ನೀಡಿದ ಎಸ್ಪಿ

ಮಂಗಳೂರು(ಉಡುಪಿ): ಉಡುಪಿಯ ನೇತ್ರ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಅನ್ಯ ಕೋಮಿನ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ‌ ಎನ್ನಲಾದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚೀಂದ್ರ ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಚಾರ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.

“ಹಿಡನ್ ಕ್ಯಾಮೆರಾ ಅಥವಾ ಅಂತಹ ಯಾವುದೇ ಸಾಧನ ಬಳಸಿರುವ ಯಾವುದೇ ಕುರುಹು ಕಂಡುಬಂದಿಲ್ಲ. ಇಂತಹ ಫೋಟೊ, ವೀಡಿಯೋಗಳನ್ನು ಸೆರೆಹಿಡಿದು ಬ್ಲಾಕ್‌ಮೇಲ್ ಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ವದಂತಿಗಳನ್ನೂ ಹಬ್ಬಿಸಲಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ, ಇದು ತಪ್ಪು ಎಂದು ಎಚ್ಚರಿಕೆ ನೀಡಿದರು.

ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊವನ್ನು ಪ್ರಸಾರ ಮಾಡಲಾಗಿಲ್ಲ, ಯಾರಾದರೂ ವೀಡಿಯೋ ದೊರಕಿದರೆ ಅದನ್ನು ನಮ್ಮ ಗಮನಕ್ಕೆ ತರಬಹುದು. ರಶ್ಮಿ ಸಾವಂತ್ ಹೆಸರಿನಲ್ಲಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಟ್ವಿಟರ್ ಖಾತೆಯವರು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಬಯಸಿದ್ದರು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ ಎಂದು ಹೇಳಿದ್ದಾರೆ.

ಯಾವುದೇ ಎಫ್ಐಆರ್ ಅಥವಾ ಯಾವುದೇ ದೂರು ದಾಖಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು. ಘಟನೆಗೆ ಸಂಬಂಧಪಟ್ಟಂತೆ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಇದನ್ನು ಮೋಜಿಗಾಗಿ ಮಾಡಲಾಗಿದ್ದು ನಂತರ ವೀಡಿಯೊಗಳನ್ನು ಅಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಕಾಲೇಜು ಆಡಳಿತದೊಂದಿಗೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಾವುದೇ ಪರಿಶೀಲಿಸದ ವಿಷಯಗಳನ್ನು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳದಂತೆ ಎಸ್ಪಿ ಸಾರ್ವಜನಿಕರಿಗೆ ವಿನಂತಿಸಿದ್ದಾರೆ. ಬೇಡದ ವಿಚಾರ ಹರಿಯಬಿಟ್ಟು ಜನರ ಮನಸ್ಸಲ್ಲಿ ಗೊಂದಲ ಸೃಷ್ಟಿಸುವ ಪೋಸ್ಟ್ ಹಾಕಬೇಡಿ. ದಾಖಲೆ ಇದ್ದರೆ ಹಂಚಿಕೊಳ್ಳಿ, ಪೊಲೀಸ್ ತನಿಖೆಗೆ ಸಹಕರಿಸಿ ಎಂದು ಎಸ್ಪಿ ಮನವಿ ಮಾಡಿದ್ದಾರೆ‌.

LEAVE A REPLY

Please enter your comment!
Please enter your name here