ಕಾರು ಅಪಘಾತವನ್ನು ಹಲ್ಲೆಯೆಂದು ಬಿಂಬಿಸಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು

ಮಂಗಳೂರು(ಕಲಬುರಗಿ): ಗುರುಮಠಕಲ್‌ನಲ್ಲಿ ಸಂಭವಿಸಿದ್ದ ಕಾರು ಅಪಘಾತವನ್ನು ಮರೆಮಾಚಿ,  ರಾಜಕೀಯ ಲಾಭಪಡೆಯಲು ತನ್ನ ಮೇಲೆ ಹಲ್ಲೆಯಾಗಿದೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಿಂಬಿಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ ಸಮೀಪ ರಾಷ್ಟ್ರೀಯ ಹೆದ್ದಾರಿ-150ರ ಸಮೀಪದ ತಮ್ಮ ಫಾರ್ಮ್ ಹೌಸ್‌ನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಶಂಕರವಾಡಿ ಕ್ರಾಸ್ ಹತ್ತಿರ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ಮಾಡಿ ಓಡಿ ಹೋಗಿದ್ದರು ಎಂದು ಆರೋಪಿಸಿ ಮಣಿಕಂಠ ರಾಠೋಡ್ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ನ.19ರಂದು ದೂರು ದಾಖಲಿಸಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಅಪಘಾತವನ್ನು ಹಲ್ಲೆಯಾಗಿ ಬಿಂಬಿಸಿದ್ದು ಗೊತ್ತಾಗಿದೆ.

‘ಶಹಾಬಾದ್ ತಾಲ್ಲೂಕಿನ ಶಂಕರವಾಡಿ ಕ್ರಾಸ್ ಬಳಿ ಹಲ್ಲೆ ಆಗಿದ್ದಾಗಿ ಮುಖಂಡ ಮಣಿಕಂಠ ರಾಠೋಡ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆಯತ್ನ ಅಲ್ಲ, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿರುವುದು ತಿಳಿದುಬಂದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ. ‘ಮಣಿಕಂಠ ರಾಠೋಡ್‌ ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಕಾರು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಪೇಟ್ಲಾ ಗ್ರಾಮದ ಸಮೀಪ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಅಲ್ಲಿಂದ ಮತ್ತೊಂದು ಕಾರಿನಲ್ಲಿ ಕಲಬುರಗಿಗೆ ಬರುವಾಗ ಮಾರ್ಗ ಮಧ್ಯದಲ್ಲಿ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಬಿಂಬಿಸಿದ್ದಾರೆ. ಇದನ್ನು ಕೆಲ ಪ್ರತ್ಯಕ್ಷದರ್ಶಿ ಸಾಕ್ಷಿಗಳು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಈ ಸಂಬಂಧ ಕೆಲವು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ‘ಪ್ರತ್ಯಕ್ಷದರ್ಶಿಯ ಸಾಕ್ಷಿಯನ್ನು ನ್ಯಾಯಾಧೀಶರ ಮುಂದೆ ಹಾಜರಿಪಡಿಸಿ ಆತನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ತನಿಖೆಯು ಪ್ರಗತಿಯಲ್ಲಿದೆ’ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here