ಸರಕಾರದ 4ನೇ ಗ್ಯಾರಂಟಿ-ಯುವನಿಧಿ ಯೋಜನೆಗೆ ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 3,000 ರೂ. ಹಾಗೂ ಡಿಪ್ಲೊಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 1,500 ರೂ.ನಂತೆ ನಿರುದ್ಯೋಗ ಭತ್ತೆ ನೀಡುವ ಯುವನಿಧಿ ಯೋಜನೆಯನ್ನು ಜಾರಿಗೊಳಿಸಲು ಸರಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

ಸಚಿವ ಸಂಪುಟದ ಅನುಮೋದನೆ ಜತೆ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬಂಧನೆಗಳು, ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಲು ಸರಕಾರವು ತೀರ್ಮಾನಿಸಿದೆ. 2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ, ವೃತ್ತಿಪರ ಕೋರ್ಸ್ ಗಳು ಸೇರಿದಂತೆ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 3 ಸಾವಿರ ರೂ. ನಿರುದ್ಯೋಗ ಭತ್ತೆ ಹಾಗೂ ಡಿಪ್ಲೊಮಾ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 1,500 ರೂ. ನಿರುದ್ಯೋಗ ಭತ್ತೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತು ಮತ್ತು ನಿಬಂಧನೆಗಳು:

ಪದವಿ/ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು. ಭತ್ತೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಾಗದವರು:

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರಿಸುವವರು. ಸರಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

LEAVE A REPLY

Please enter your comment!
Please enter your name here