ಆಸ್ಟ್ರೇಲಿಯಾ ಓಪನ್ ಗೆದ್ದ ರೋಹನ್‌ ಬೋಪಣ್ಣಗೆ ₹50 ಲಕ್ಷ ಬಹುಮಾನ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಂಗಳೂರು/ಬೆಂಗಳೂರು: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಕೊಡಗಿನ ಮೂಲದ ರೋಹನ್‌ ಬೋಪಣ್ಣ ಅವರನ್ನು ಭೇಟಿಯಾಗಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ₹50 ಲಕ್ಷ ಬಹುಮಾನ ಘೋಷಿಸಿದ್ದಾರೆ.

ರೋಹನ್‌ ಬೋಪಣ್ಣ ಅವರಿಗೆ ಕುಟುಂಬದ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಸನ್ಮಾನ ಮಾಡಿದರು. ಈ ವೇಳೆ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ‘ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್‌ ಬೋಪಣ್ಣ ಅವರನ್ನು ಭೇಟಿಯಾಗಿ ಅಭಿನಂದಿಸಿ, ₹50 ಲಕ್ಷ ಬಹುಮಾನ ಘೋಷಿಸಿದೆ’ ಎಂದು ಬರೆದುಕೊಂಡಿದ್ದಾರೆ.

ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಜ.27ರಂದು ನಡೆದಿದ್ದ ಆಸ್ಟ್ರೇಲಿಯನ್‌ ಓಪನ್ ಡಬಲ್ಸ್‌ ಫೈನಲ್‌ ಪಂದ್ಯದಲ್ಲಿ ಸಿಮೋನ್ ಬೊಲೆಲಿ ಮತ್ತು ಆ್ಯಂಡ್ರಿಯಾ ವಾವಸೋರಿ ಜೋಡಿಯನ್ನು ಸೋಲಿಸಿ ಪ್ರಶಸ್ತಿ ಗೆದ್ದಿದ್ದರು. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಆಟಗಾರನೆಂಬ ಹೆಗ್ಗಳಿಕೆಗೂ ರೋಹನ್ ಪಾತ್ರರಾಗಿದ್ದಾರೆ. ಈ ಹಿಂದೆ ಲಿಯಾಂಡರ್ ಪೇಸ್ ಮತ್ತು ಮಹೇಶ್ ಭೂಪತಿ ಪ್ರಶಸ್ತಿ ಗೆದ್ದಿದ್ದರು. ಮಹಿಳೆಯರ ವಿಭಾಗದಲ್ಲಿ ಸಾನಿಯಾ ಮಿರ್ಜಾ ಜಯಿಸಿದ್ದರು.

LEAVE A REPLY

Please enter your comment!
Please enter your name here