ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರ ಬಂಧನ

ಮಂಗಳೂರು: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ.

ಆರೋಪಿಗಳು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು, ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here