ಡಿವಿ ಸದಾನಂದಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ-ಒಕ್ಕಲಿಗರ ಸಂಘದಿಂದ ಘೋಷಣೆ

ಮಂಗಳೂರು(ಬೆಂಗಳೂರು): ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಡಿವಿ ಸದಾನಂದಗೌಡ ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು. ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here