ಕೋಮುವಾದದ ವಿರುದ್ಧ ಸಂಘಟಿತರಾಗಲು ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ನಿರ್ಧಾರ

ಮಂಗಳೂರು: ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಬುಧವಾರ ನಗರ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಧಾರ್ಮಿಕ ಅಸಹಿಷ್ಣುತೆ, ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ವಿಚಾರದ ವಿರುದ್ಧ ಸಂಘಟಿತರಾಗಿ ಹೋರಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲೆಯ ಪ್ರಭಾವಿ ನಾಯಕ ಶ್ರೀಧರ ಭಿಡೆ ” ಬ್ರಾಹ್ಮಣರು ಅಂದರೆ ದೇಶದ ಸಮಗ್ರ ಜನರನ್ನೂ ಪ್ರೀತಿಸುವ ಮತ್ತು ಸಮಾಜದ ಸುಧಾರಣೆಯ ನಾಯಕತ್ವವನ್ನು ವಹಿಸಿದವರು. ಹಿಂದೂ ಮುಸ್ಲಿಂ ಸಂತ ಪರಂಪರೆಯನ್ನೂ ಬೆಳೆಸಿದವರು. ನಾವು ಸಂಕುಚಿತರಾಗುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ. ಖ್ಯಾತ ಚಿಂತಕ ಪ್ರೊ. ರಾಜಾರಾಮ ತೋಳ್ಪಾಡಿಯವರು ಮಾತನಾಡುತ್ತಾ, ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ಬರುತ್ತಿರುವಾಗ ಸಮಾನ ಮನಸ್ಕ ಬ್ರಾಹ್ಮಣರು ಆ ನಿಟ್ಟಿನಲ್ಲಿ ತಮ್ಮ ಸಮುದಾಯಕ್ಕೆ ಸತ್ಯ ಸಂದೇಶ ನೀಡುವ ಈ ಕಾರ್ಯ ಅಗತ್ಯ ಎಂದರು.ಬ್ಯಾಂಕ್ ನೌಕರ ಸಂಘದ ಹಿರಿಯ ನಾಯಕ ಟಿ ಆರ್ ಭಟ್ ಮಾತನಾಡಿ ಬ್ರಾಹ್ಮಣರೆಲ್ಲರೂ ನಿರ್ದಿಷ್ಟ ಸಿದ್ದಾಂತ ಮತ್ತು ಪಕ್ಷಕ್ಕೆ ಸೇರಬೇಕು ಅಥವಾ ಸೇರಿದ್ದಾರೆ ಎಂಬ ನಿಲುವಿನ ವಿರುದ್ದ ನಾವು ಮಾತನಾಡಲೇಬೇಕು , ದೇಶದ ಆಗುಹೋಗುಗಳ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪರಿಸ್ಥಿತಿ ಉಳಿಯಬೇಕು ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಸಂಘಟಕ ಎಂ. ಜಿ ಹೆಗಡೆ ಮಾತನಾಡಿ ಬಿಜೆಪಿ ಮತ್ತು ಕೋಮು ಸಂಘಟನೆಗಳಿಗೆ ಬೆಂಬಲಿಸದ ಬ್ರಾಹ್ಮಣರಿಗೆ ಕೌಟುಂಬಿಕ ಕಿರುಕುಳ ನೀಡುವುದು, ಸಾರ್ವಜನಿಕವಾಗಿ ಹೀಯಾಳಿಸುವ, ವ್ಯವಹಾರಿಕವಾಗಿ ತೊಂದರೆ ಕೊಡುವ ಮೂಲಕ ಭಯದ ವಾತಾವರಣ ಹುಟ್ಟಿಸುತ್ತಿರುವ ಕೆಲವು ಬ್ರಾಹ್ಮಣರಿಗೆ ಸರಿಯಾದ ರೀತಿಯಲ್ಲೇ ಉತ್ತರ ನೀಡುತ್ತೇವೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬ್ರಾಹ್ಮಣರಿಗೆ ಸರ್ಕಾರ ನೀಡುವ ಸವಲತ್ತು ಸಿಗುವಂತೆ ಮಾಡುತ್ತೇವೆ. ಕೇವಲ ರಾಜಕೀಯ ವಿರೋಧಕ್ಕಾಗಿ ದ್ವೇಷಿಸುವ ಬೆದರಿಸುವ , ಕಿರುಕುಳ ನೀಡುವ ಕೀಳು ಮನಸ್ಥಿತಿಯಿಂದ ಕೆಲವರು ಹೊರಬರಬೇಕು. ಅನಗತ್ಯ ಸಂಘರ್ಷಕ್ಕೆ ಇದು ಕಾರಣವಾದೀತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಕ್ಷದ ಆಯ್ಕೆ ವ್ಯಕ್ತಿಯ ಸ್ವಾತಂತ್ರ್ಯ . ಅದಕ್ಕೂ ಕಿರುಕುಳ ಎಂದರೆ ಅಪಾಯಕಾರಿ. ಇಷ್ಟು ದಿನ ಸಹಿಸಿಕೊಂಡಿದ್ದೇವೆ . ಇನ್ನು ಉತ್ತರಿಸುವ ದಾರಿ ಹುಡುಕುತ್ತೇವೆ. ಕೋಮುವಾದಿ ಬ್ರಾಹ್ಮಣರಿಂದ ಇಂತಹ ಕಿರುಕುಳ ಆದರೆ ನಮ್ಮ ಗಮನಕ್ಕೆ ತನ್ನಿ. ನಾವು ಒಟ್ಟಾಗಿ ಎದುರಿಸೋಣ. ಮುಂದಿನ ದಿನಗಳಲ್ಲಿ ಸಮಾನ ಮನಸ್ಕ ಮತ್ತು ಎಲ್ಲಾ ಜಾತಿ ಧರ್ಮದ ಜನರನ್ನು ಸಹಿಷ್ಣುತೆಯಿಂದ , ಪ್ರೀತಿಯಿಂದ ನೋಡುವ ಬ್ರಾಹ್ಮಣರನ್ನು ವ್ಯಾಪಕವಾಗಿ ಸಂಘಟಿಸಲಾಗುವುದು ಎಂದರು.

ಕರಾವಳಿಯಲ್ಲಿ ಬ್ರಾಹ್ಮಣರ ಸಂಖ್ಯೆ ಕಡಿಮೆಯಾದರೂ ಅವರ ರಾಜಕೀಯ ಪ್ರಭಾವ ಜೋರಾಗಿಯೇ ಇದೆ. ಬ್ರಾಹ್ಮಣರೆಲ್ಲರೂ ಬಿಜೆಪಿಗರು ಕೋಮುವಾದಿಗಳು ಎಂಬ ಹಣೆಪಟ್ಟಿಯ ವಿರುದ್ದ ಸಂದೇಶ ರವಾನಿಸಬೇಕಾಗಿದೆ. ಬಿಜೆಪಿಗೆ ಬೆಂಬಲಿಸದವರು ಬ್ರಾಹ್ಮಣರೇ ಅಲ್ಲ ಹಿಂದೂಗಳೇ ಅಲ್ಲ ಎಂಬ ಕೀಳುಮಟ್ಟದ ಬೆದರಿಕೆಯ ವಿರುದ್ದ ಸಮರ ಸಾರುವ ನಿರ್ಣಯ, ಇದು ಕರಾವಳಿಯ ರಾಜಕೀಯ ಮತ್ತು ಸಾಮಾಜಿಕ ಬದಲಾವಣೆಗೆ ಖಂಡಿತ ಹೊಸರೂಪ ನೀಡಲಿದೆ. ಅದೇ ರೀತಿ ಬಡತನದಲ್ಲಿರುವ ಬ್ರಾಹ್ಮಣರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ತಲುಪಿಸುವ ಯೋಜನೆ ರೂಪಿಸಲೂ ನಿರ್ಧರಿಸಲಾಗಿದೆ ಎಂದರು. ಈ ಸಭೆಯಲ್ಲಿ ಸುರತ್ಕಲ್ ಹಿರಿಯ ಮುಂದಾಳು ಗುರುರಾಜ ಆಚಾರ್ಯ, ಬೆಟ್ಟ ರಾಜಾರಾಮ ಭಟ್, ಮಹೇಶ ಕುಮಾರ್ ಸುಳ್ಯ, ಸತ್ಯೇಂದ್ರ ವೇಣೂರು, ನಿವೃತ್ತ ಹಿರಿಯ ಬ್ಯಾಂಕ್ ಅಧಿಕಾರಿ ಟಿ ಆರ್ ಭಟ್, ಡಾ.ಶಿವಾನಂದ ಮುಂಡಾಜೆ, ರಮೇಶ ಕೋಟೆ, ಕೆ.ರಾಘವೇಂದ್ರ, ವಿನಯ ಆಚಾರ್ಯ, ಬೆಟ್ಟ ಜಯರಾಮ ಭಟ್ಟ ದಿನೇಶ್ ರಾವ್ ಬಾಲಕೃಷ್ಣ ಭಟ್ ಕೆಮ್ಮಟ್ಟು ಸ್ವರ್ಣ ಭಟ್, ವಕೀಲೆ ವಿಧ್ಯಾ ಭಟ್ ನಮಿತಾ ರಾವ್, ಚೈತನ್ಯಾ ಭಟ್, ಪ್ರವೀಣ ಭಟ್ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here