ಹಿರಿಯ ರಂಗಕರ್ಮಿ, ಗುಡ್ಡದ ಭೂತ ನಿರ್ದೇಶಕ ಸದಾನಂದ ಸುವರ್ಣ ನಿಧನ

ಮಂಗಳೂರು: ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ(93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ(ಜು.17) ಪುರಭವನದಲ್ಲಿ ಮಧ್ಯಾಹ್ನ 1 ರಿಂದ 3 ಗಂಟೆ ತನಕ ಮೃತರ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರಿಚ್ಛೆಯಂತೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕನ್ನಡ, ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವಿ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದ ಸದಾನಂದ ಸುವರ್ಣ, ಘಟಶ್ರಾದ್ಧ, ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನೆಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ರಚಿಸಿದ್ದರು. ಮೂಲತಃ ದ.ಕ ಜಿಲ್ಲೆಯ ಮೂಲ್ಕಿಯವರಾದ ಸದಾನಂದ ಸುವರ್ಣ ಮುಂಬೈನಲ್ಲಿ ರಾತ್ರಿ ಹೈಸ್ಕೂಲ್ ನಲ್ಲಿ ಅಧ್ಯಾಪಕರಾಗಿ 5 ವರ್ಷ ಕೆಲಸ ಮಾಡಿದ ಬಳಿಕ 3 ದಶಕಗಳ ಕಾಲ ಬಣ್ಣದ ವ್ಯಾಪಾರಿಯಾಗಿದ್ದರು. ನಾಟಕ ರಚನೆ, ನಟನೆ, ನಿರ್ದೇಶನದಲ್ಲಿ ಐದು ದಶಕಗಳ ಕಾಲ ಶ್ರಮಿಸಿದ ಅವರು, ಮುಂಬೈಯಲ್ಲಿ ಕನ್ನಡ ರಂಗಭೂಮಿಗೆ ಚೈತನ್ಯ ತುಂಬಿದ್ದರು. ಸಾಹಿತ್ಯದಲ್ಲೂ ಆಸಕ್ತಿ ಹೊಂದಿದ್ದ ಅವರು ಸಣ್ಣ ಕತೆ, ಕಾದಂಬರಿಗಳನ್ನು ಕೂಡ ಬರೆದಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ತಬರನ ಕತೆ, ಮನೆ, ಕ್ರೌರ್ಯ ಚಿತ್ರಗಳನ್ನು ನಿರ್ಮಿಸಿದ್ದರು. 1989ರಲ್ಲಿ ತೇಜಸ್ವಿ ಅವರ ಸಣ್ಣ ಕತೆ ಆಧಾರಿತ ಕುಬಿ ಹಾಗೂ ಇಯಾಲ ಸುವರ್ಣ ಅವರ ನಿರ್ದೇಶನದ ಮೊದಲ ಚಿತ್ರವಾಗಿದೆ. ಗುಡ್ಡದ ಭೂತ ಅವರ ನಿರ್ದೇಶನದ ಜನಪ್ರಿಯ ಕಿರುತೆರೆ ಧಾರವಾಹಿಯಾಗಿದ್ದು ಶಿವರಾಮ ಕಾರಂತ, ಶ್ರೀ ನಾರಾಯಣ ಗುರು, ತುಳುನಾಡು ಒಂದು ಇಣುಕುನೋಟ ಎಂಬ ಸಾಕ್ಷ್ಯಚಿತ್ರವನ್ನು ಸುವರ್ಣ ನಿರ್ದೇಶಿಸಿದ್ದರು.

LEAVE A REPLY

Please enter your comment!
Please enter your name here