ಆ.10ರವರೆಗೆ ಬೆಂಗಳೂರು- ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು

ಮಂಗಳೂರು: ಸಕಲೇಶಪುರ ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು- ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಬಾರಿ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿತ್ತು. ರೈಲ್ವೆ ಸಿಬ್ಬಂದಿ ಹಗಲಿರುಳು ದುರಸ್ತಿ ಕಾರ್ಯ ಕೈಗೊಂಡಿದ್ದರೂ ಸುರಿಯುತ್ತಿರುವ ಜಡಿಮಳೆ ಅಡ್ಡಿಯಾಗಿದೆ. ಶನಿವಾರ ಹಾಗೂ ಭಾನುವಾರ ಕೂಡ ಹಲವು ರೈಲುಗಳ ಸಂಚಾರ ರದ್ದಾಗಿದ್ದು, ಕೆಲವು ರೈಲುಗಳನ್ನು ಮಾರ್ಗ ಬದಲಾಯಿಸಿ ಕಳುಹಿಸಲಾಗಿವೆ. ಹಳಿಯ ಕೆಳಭಾಗದಲ್ಲಿ ಮಣ್ಣು ಭಾರಿ ಆಳಕ್ಕೆ ಕುಸಿದಿದ್ದು, ಹಳಿಗೆ ಅಪಾಯ ಎದುರಾದ ಕಾರಣ ರೈಲ್ವೆ ಸಂಚಾರ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .

ಎಡಕುಮಾರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ನಡೆಯುತ್ತಿರುವ ಪುನಃಸ್ಥಾಪನೆ ಕಾರ್ಯವನ್ನು ನಿರಂತರವಾಗಿ ವಿಭಾಗೀಯ ರೈಲ್ವೆ ನಿರ್ವಾಹಕಿ ಶಿಲ್ಪಿ ಅಗರ್ವಾಲ್ ಮತ್ತು ಹಿರಿಯ ಅಧಿಕಾರಿಗಳು ಪರಿಶೀಲಿಸುತ್ತಿದ್ದು ಈ ಪ್ರದೇಶಕ್ಕೆ ಯಾವುದೇ ರಸ್ತೆ ಸಂಪರ್ಕ ಇಲ್ಲ, ದುರಸ್ತಿಗೆ ಬೇಕಾದ ಎಲ್ಲ ವಸ್ತುಗಳನ್ನು ರೈಲಿನ ವ್ಯಾಗನ್ ಮೂಲಕವೇ ತರಬೇಕಾಗುತ್ತದೆ. ಇದೂ ಸಹ ಕಾಮಗಾರಿಗೆ ಅಡ್ಡಿಯಾಗಿದೆ. ಹಗಲು ರಾತ್ರಿ ನಿರಂತರ ಕೆಲಸ ಮಾಡಿದರೂ ರೈಲು ಮಾರ್ಗವನ್ನು ಸಹಜ ಸ್ಥಿತಿಗೆ ತರುವುದಕ್ಕೆ ಇನ್ನೂ 15 ದಿನ ಬೇಕಾಗಬಹುದು ಎಂದು ನೈಋತ್ಯ ರೈಲ್ವೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಸುಮಾರು 750ಕ್ಕೂ ಅಧಿಕ ಮಂದಿ ಕಾಮಗಾರಿ ನಡೆಸುತ್ತಿದ್ದು ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಹಳಿಯ ಕೆಳಭಾಗದಲ್ಲಿ ಸ್ಥಿರತೆ ಇಲ್ಲದೆ ಹಳಿ ಬಾಗುವ, ಹಾನಿಗೊಳ್ಳುವ ಅಪಾಯವೂ ಇದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿದೆ. ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್, ಮಂಗಳೂರು ಸೆಂಟ್ರಲ್ -ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (07378) ರೈಲು , ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ (07377) ರೈಲು, ಕೆಎಸ್‌ಆರ್ ಬೆಂಗಳೂರು-ಕಣ್ಣೂರು ರೈಲು ಸಂಖ್ಯೆ (16511) ರೈಲು, ಬೆಂಗಳೂರು-ಕಾರವಾರ ಕೆಎಸ್‌ಆರ್ ಎಕ್ಸ್‌ಪ್ರೆಸ್ (16595), ಕಣ್ಣೂರು-ಬೆಂಗಳೂರು (16512) ರೈಲು, ಕಾರವಾರ-ಕೆಎಸ್ ಆರ್ ಬೆಂಗಳೂರು ಎಕ್ಸ್‌ಪ್ರೆಸ್ (16596) ರೈಲು, ಬೆಂಗಳೂರು-ಮುರುಡೇಶ್ವರ (16585) ರೈಲು, ಮುರ್ಡೇಶ್ವರ- ಬೆಂಗಳೂರು (16586) ರೈಲು ಸಂಚಾರ ರದ್ದುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here